ಇಎನ್ಎಲ್ ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರಗಳನ್ನು ಮಾದರಿ ನಗರಗಳನ್ನಾಗಿ ಮಾಡುವಲ್ಲಿ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಇಲ್ಲಿನ ವಿಜಯನಗರದ ಕೆಂಪ್ಪಣ್ಣವರ ಕಲ್ಯಾಣ ಮಂಟಪದಲ್ಲಿ ವಾರ್ಡ್ ನಂ. 39, 41 ಹಾಗೂ 46 ರಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಒಟ್ಟು 43 ಕೋಟಿ ಅನುದಾನದ ವಿವಿಧ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಕಾರ್ಯಕಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ. ಅವಳಿ ನಗರಗಳು ಬೆಳೆಯುತ್ತಿವೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ನಿರ್ಮಾಣ ಮಾಡಲಾಗಿದೆ. ವಂದೇ ಭಾರತ ಎಕ್ಸಪ್ರೆಸ್ ರೈಲನ್ನು ಧಾರವಾಡ – ಬೆಂಗಳೂರು ನಡುವೆ ಓಡಿಸಲಾಗುವುದು. ವಿಮಾನ, ರೈಲ್ವೆ, ಕುಡಿಯುವ ನೀರು ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅನುದಾನ ತಂದು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಹುಬ್ಬಳ್ಳಿ ಧಾರವಾಡದಲ್ಲಿ 24×7 ಕುಡಿಯುವ ನೀರು ಒದಗಿಸುವ ಯೋಜನೆಯನ್ನು ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರಾಜ ಕಾಲುವೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕಾಮಗಾರಿಯು ಪ್ರಗತಿಯಲ್ಲಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಪ್ರದೀಪ ಶೆಟ್ಟರ, ಪಾಲಿಕೆ ಸದಸ್ಯರಾದ ವೀರಣ್ಣ ಸವಡಿ, ಸಂತೋಷ ಚವ್ಹಾಣ, ರಾಜಣ್ಣ ಕೊರವಿ, ಸೀಮಾ ಮೊಗಲಿಶೆಟ್ಟರ ಸೇರಿದಂತೆ ಇತರರು ಭಾಗವಹಿಸಿದ್ದರು.
****