ಇಎನ್ಎಲ್ ಸುವರ್ಣ ಸೌಧ: ರಾಜ್ಯದಲ್ಲಿ 10.12ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿದ್ದು,ಅದರಲ್ಲಿ 6.64ಲಕ್ಷ ಹೆಕ್ಟೇರ್ ಜಮೀನನ್ನು ಕಂದಾಯ ಇಲಾಖೆಗೆ ವಾಪಸ್ ನೀಡಲು ಅರಣ್ಯ ಇಲಾಖೆ ಒಪ್ಪಿಕೊಂಡಿದ್ದು ಶೀಘ್ರ ಅದನ್ನು ವಾಪಸ್ ಪಡೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.
ವಿಧಾನಪರಿಷತ್ನಲ್ಲಿ ಸದಸ್ಯ ಪ್ರತಾಪ್ಚಂದ್ರಶೆಟ್ಟಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಡೀಮ್ಡ್ ಫಾರೆಸ್ಟ್ ಎಂಬುದೇ ಅವೈಜ್ಞಾನಿಕ. ಸರಕಾರಿ ಜಮೀನು ಯಾವ್ಯಾವ ಮತ್ತು ಎಲ್ಲೆಲ್ಲಿ ಇದೆಯೋ ಅದನ್ನೆಲ್ಲಾ ಅರಣ್ಯ ಇಲಾಖೆಯದ್ದು ಅಂತ ಜಿಲ್ಲಾಧಿಕಾರಿಗಳು ಬರೆದುಹೋಗಿದ್ದೇ ದೊಡ್ಡ ಸಮಸ್ಯೆಯಾಗಿದೆ. 10.12ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ನಲ್ಲಿ ರೈತರು ವ್ಯವಸಾಯ ಮಾಡ್ತಾ ಇದ್ದಾರೆ;ಅದನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ಆಗ್ತಿಲ್ಲ. ಕಳೆದ ಆರೆಳು ತಿಂಗಳಿಂದ ಅರಣ್ಯ ಇಲಾಖೆಯೊಂದಿಗೆ ನಿರಂತರ ಸಭೆ ನಡೆಸಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು 6.64ಲಕ್ಷ ಹೆಕ್ಟೇರ್ ಜಮೀನು ಪ್ರದೇಶವನ್ನು ವಾಪಸ್ ನೀಡಲು ಒಪ್ಪಿಕೊಂಡಿದ್ದಾರೆ.ಅದನ್ನು ಪಡೆದುಕೊಂಡು ವ್ಯವಸಾಯ ಮಾಡುತ್ತಿರುವವರಿಗೆ ಮತ್ತು ಮನೆಕಟ್ಟಿಕೊಂಡವರಿಗೆ ನೀಡಲಾಗುವುದು ಎಂದು ಅವರು ವಿವರಿಸಿದರು.
ವ್ಯವಸಾಯ ಮಾಡುತ್ತಿರುವವರಿಗೆ ಮತ್ತು ಮನೆಕಟ್ಟಿಕೊಂಡವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ದೂರುಗಳು ಎಲ್ಲಿಯೂ ಕೇಳಿಬಂದಿಲ್ಲ;ಆದ್ರೂ ಆ ರೀತಿ ಕೇಳಿಬಂದಲ್ಲಿ ಕಿರುಕುಳ ನೀಡದಂತೆ ಕಟ್ಟುನಿಟ್ಟಿನ ಸೂಚನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೀಡಲಾಗುವುದು ಎಂದರು.
ಉಡುಪಿ ಜಿಲ್ಲೆಯಲ್ಲಿರುವ ಡೀಮ್ಡ್ ಫಾರೆಸ್ಟ್ ಪ್ರದೇಶವನ್ನು ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಭೌತಿಕ ಸ್ಥಳ ಪರಿಶೀಲಿಸಿ ಸಿದ್ದಪಡಿಸಿ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ 68,794.76 ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಇದ್ದು, ಈ ಪೈಕಿ 34,918.20 ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ಪಟ್ಟಿಯಿಂದ ವಿರಹಿತಗೊಳಿಸಲು ಜಿಲ್ಲಾ ಸಮಿತಿಯಿಂದ ರಾಜ್ಯ ಸಮಿತಿಗೆ ವರದಿ ಸಲ್ಲಿಸಲಾಗಿದೆ ಎಂದು ವಿವರಿಸಿದ ಸಚಿವ ಅಶೋಕ ಅವರು ಡೀಮ್ಡ್ ಫಾರೆಸ್ಟ್ ಪಟ್ಟಿಯಲ್ಲಿ ಸೇರಿರುವ ಜಮೀನುಗಳ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಪ್ರಕರಣವು ಇತ್ಯರ್ಥವಾದ ನಂತರ ನಿಯಮಾನುಸಾರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.