ಇಎನ್ಎಲ್ ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಪ್ರತಿಸ್ಪಂದನೆ ಸಿಗುತ್ತಿದೆ. ಪಕ್ಷವು 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಹಿರಿಯೂರಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರ ಉತ್ಸಾಹದ ಪಾಲ್ಗೊಳ್ಳುವಿಕೆಯೊಂದಿಗೆ ಬಿಜೆಪಿ ಅದ್ಧೂರಿ ವಿಜಯ ಸಂಕಲ್ಪ ಯಾತ್ರೆ ನಡೆಸಿದರು. ಸಹಸ್ರಾರು ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರ ಜೊತೆ ಅವರು ಮಾತನಾಡಿದರು.
ಕೇಂದ್ರ ಸಚಿವ ನಾರಾಯಣಸ್ವಾಮಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಜಿಲ್ಲಾಧ್ಯಕ್ಷ ಮುರಳಿ ಅವರು ರೋಡ್ ಷೋ ದಲ್ಲಿ ಭಾಗವಹಿಸಿದ್ದರು. ಪಕ್ಷದ ಸಾಧನೆಗಳು, ಅಭಿವೃದ್ಧಿ ಕಾರ್ಯದಿಂದಾಗಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಜನಪರವಾಗಿ ಕೆಲಸ ಮಾಡಲಿದೆ ಎಂದ ಮುಖಂಡರು, ಅಭಿವೃದ್ಧಿ ಕಾರ್ಯಗಳಿಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.