ಇಎನ್ಎಲ್ ಬೆಂಗಳೂರು: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಗಲಿಕೆ ವಿಷಯ ತಿಳಿಯುತ್ತಿದ್ದತೆ ನಾಡಿನ ವಿವಿಧ ಮಠಾಧೀಶರು, ಸಚಿವರು, ಶಾಸಕರು, ಭಕ್ತರ ದಂಡು ಆಶ್ರಮದತ್ತ ಧಾವಿಸುತ್ತಿದ್ದು, ಕಂಬನಿ ಮಿಡಿಯುತ್ತಿದ್ದಾರೆ. ಅಂತಿಮ ದರ್ಶನಕ್ಕೆ 50 ಲಕ್ಷಕ್ಕೂ ಅಧಿಕ ಭಕ್ತರು ಬರುವ ನಿರೀಕ್ಷೆ ಇದೆ.
ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಜನವರಿ 3ರಂದು ಬೆಳಿಗ್ಗೆ 5 ರಿಂದ ಸಂಜೆ 4ರ ವರೆಗೆ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಕಲ್ಪಿಸಲಾಗಿದೆ. ಬಳಿಕ ಸಂಜೆ 5ಕ್ಕೆ ಅಂತಿಮ ಯಾತ್ರೆಯು ಸೈನಿಕ ಶಾಲೆಯಿಂದ ಆರಂಭಗೊಂಡು, ಶಿವಾಜಿ ವೃತ್ತ, ಗಾಂಧಿ ಚೌಕಿ, ಸಿದ್ಧೇಶ್ವರ ಗುಡಿ ಮೂಲಕವಾಗಿ ಸಾಗಿ ಆಶ್ರಮ ತಲುಪಲಿದೆ. ಸಂಜೆ 6.5ಕ್ಕೆ ಸರ್ಕಾರದ ಸಕಲ ಗೌರವಗಳೊಂದಿಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಯಲಿದೆ.
‘ಗುಡಿ ಕಟ್ಟಬಾರದು, ಸಮಾದಿ ಮಾಡಬಾರದು’ ಎಂಬ ಶ್ರೀಗಳ ಆಶಯದಂತೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ.
ಅಂತ್ಯಸಂಸ್ಕಾರದಲ್ಲಿ ಮಠಾಧೀಶರು, ಗಣ್ಯರು, ಮಾಧ್ಯಮದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದ್ದಾರೆ.
ಆಶ್ರಮದ ಶಿಷ್ಯ ವರ್ಗ, ನಾಡಿನ ಹಿರಿಯ ಮಠಾಧೀಶರು, ಗಣ್ಯರು ಶ್ರೀಗಳ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನಡೆಸಲು ಅಗತ್ಯ ಸಿದ್ಧತೆ ಕೈಗೊಂಡಿದ್ದಾರೆ.
ಶ್ರೀಗಳ ಅಂತಿಮ ದರ್ಶನಕ್ಕೆ ಸಹಸ್ರಾರು ಭಕ್ತರು ಆಶ್ರಮದತ್ತ ಧಾವಿಸುತ್ತಿರುವುದರಿಂದ ಯಾವುದೇ ಅಸ್ತವ್ಯಸ್ತವಾಗದಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅಗತ್ಯ ವ್ಯವಸ್ಥೆ, ಭದ್ರತೆ ಮಾಡಿದ್ದಾರೆ.
ಕೆಪಿಸಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಉಪಹಾರದ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರೂ ಸಹ ಭಕ್ತರಿಗೆ ಉಪಹಾರದ ವ್ಯವಸ್ಥೆ ಮಾಡಬಹುದಾಗಿದೆ ಎಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ತಿಳಿಸಿದರು.