ಇಎನ್ಎಲ್ ಬೆಳಗಾವಿ ಸುವರ್ಣ ಸೌಧ:
ಕೊಡಗು ಜಿಲ್ಲೆಯಲ್ಲಿ ಆರ್ಟಿಸಿಯ ಬೆಳೆಕಾಲಂನಲ್ಲಿ ಬಹುವಾರ್ಷಿಕ ವಾಣಿಜ್ಯ ಬೆಳೆಗಳನ್ನು ನಮೂದಿಸಲು ಕ್ರಮಕೈಗೊಳ್ಳಲಾಗುವುದು. ಈ ಸಮಸ್ಯೆ ಗಮನಕ್ಕಿದ್ದು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಪರಿಷತ್ನಲ್ಲಿ ತಿಳಿಸಿದರು.
ಸದಸ್ಯೆ ವೀಣಾ ಅಚ್ಚಯ್ಯ ಅವರು ಪ್ರಶ್ನೋತ್ತರ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಮತ್ತು ಕೊಡಗು ಜಿಲ್ಲೆಯಲ್ಲಿ ವಿಶೇಷವೆಂದು ಪರಿಗಣಿಸಿ ಪಹಣಿಯ ಬೆಳೆಕಾಲಂನಲ್ಲಿ ಬಹುವಾರ್ಷಿಕ ವಾಣಿಜ್ಯ ಬೆಳೆಗಳನ್ನು ನಮೂದಿಸಲು ಕ್ರಮವಹಿಸಲಾಗುವುದು ಎಂದರು.
ಸದಸ್ಯೆ ವೀಣಾ ಅವರು ಕೊಡಗು ಜಿಲ್ಲೆಯಲ್ಲಿ ಪಹಣಿಯಲ್ಲಿ ಬೆಳೆಕಾಲಂನಲ್ಲಿ ಬಹುವಾರ್ಷಿಕ ವಾಣಿಜ್ಯ ಬೆಳೆಗಳಾದ ಕಾಫಿ ಮತ್ತು ಕರಿಮೆಣಸುಗಳು ವರ್ಷದ 365 ದಿನವೂ ನಮೂದಾಗಿರುವ ಬದಲು 3 ತಿಂಗಳು ಅಥವಾ 06 ತಿಂಗಳಿಗೊಮ್ಮೆ ಪ್ರಸ್ತುತ ನಮೂದಿಸಲಾಗುತ್ತಿರುವುದರಿಂದ ಬೆಳೆಗಾರರಿಗೆ ಸಾಲಸೌಲಭ್ಯ ಸೇರಿದಂತೆ ಇನ್ನೀತರ ಸೌಲಭ್ಯಗಳನ್ನು ಪಡೆದುಕೊಳ್ಳಲು ತೊಂದರೆಯಾಗುತ್ತಿದೆ ಎಂದು ಸದನದಲ್ಲಿ ತಿಳಿಸಿದ ಹಿನ್ನೆಲೆಯಲ್ಲಿ ಸಚಿವರು ಉತ್ತರಿಸಿದರು.